Monthly Archives: ಅಕ್ಟೋಬರ್ 2008

ಅಮ್ಮನಿಗೆ ಬರೆದ ಪೋಸ್ಟ್ ಮಾಡಲಾಗದ ಪತ್ರ..

ಸಾಮಾನ್ಯ

ಪ್ರೀತಿಯ ಅಮ್ಮನಿಗೆ,

ಅಮ್ಮಾ ಹೇಗಿದ್ದೀಯಾ? ನಿನ್ನ ಪರಿಸ್ಥಿತಿ ಅರಿತೂ ಈ ಪ್ರಶ್ನೆ ಕೇಳುತ್ತಿರುವುದಕ್ಕೆ ಕ್ಷಮೆಯಿರಲಿ. ಇದು ನಾನು ನಿನಗೆ ಬರೆಯುತ್ತಿರುವ ಮೊದಲ ಪತ್ರ. ಇಂತಹ ಪರಿಸ್ಥಿತಿ, ಅಂದರೆ ಈ ಬಗೆಯ ಪತ್ರ ಬರೆಯುವ ಪರಿಸ್ಥಿತಿ ಪ್ರಪಂಚದಲ್ಲಿ ಯಾರಿಗೂ ಬಾರದಿರಲಿ.

ನನ್ನ ಬಗ್ಗೆ ನನಗೆ ನಾಚಿಕೆಯಾಗುತ್ತಿದೆ. ಜುಗುಪ್ಸೆಯಾಗುತ್ತಿದೆ. ಸಂಕಟದ ಸಮಯದಲ್ಲೂ ನಿನ್ನೊಂದಿಗೆ ಇರಲಾಗದ ನನ್ನ ಬದುಕಿಗೆ ಧಿಕ್ಕಾರವಿರಲಿ. ಒಂದೊಂದು ಸಲ ಕೆಲಸ ಬಿಟ್ಟು ಊರಿಗೆ ಓಡಿ ಬರಲೇ ಅನಿಸುತ್ತದೆ. ಆದರೆ ನಮ್ಮ ಮುಂದಿರುವ ಆರ್ಥಿಕ ಮುಗ್ಗಟ್ಟು, ಧೈರ್ಯವನ್ನು ಕಸಿಯುತ್ತದೆ.

ನಿನ್ನನ್ನು ಮುಖತಃ ಎದುರಿಸಲಾಗದೇ, ದೂರವಾಣಿಯಲ್ಲಿ ಹೇಳಲು ಸಾಧ್ಯವಾಗದೇ ಈ ಪತ್ರ ಬರೆಯುತ್ತಿದ್ದೇನೆ. ಕಾಲ ಚಕ್ರ ಉರುಳುತ್ತಲೇ ಇದೆ. ಹಿಂದೆ ಮುಂದೆ ಸಂತೆ ಸಾಲು… ಸಾವು ಯಾರಿಗಿಲ್ಲ ಎಂದೆಲ್ಲ ಹೇಳಿದರೂ/ಅರಿವಿದ್ದರೂ ಅಪ್ಪನ ಸಾವನ್ನು ನನಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೆಲಸದ ಒತ್ತಡ, ಬೆಂಗಳೂರಿನ ವಾತಾವರಣದ ನಡುವೆ ಎಲ್ಲವನ್ನೂ ತುಸು ಮರೆತಂತೆ ಅನ್ನಿಸಿದರೂ, ಎದೆಯಲ್ಲಿ ಉರಿಯುತ್ತಿರುವ ಬೆಂಕಿಯನ್ನು ನಂದಿಸಲು ಸಾಧ್ಯವೇ? ನೀನೇ ಹೇಳು.

ನನ್ನ ಪರಿಸ್ಥಿತಿಯೇ ಹೀಗಿದೆ. ಇನ್ನು ನಿನ್ನ ಪರಿಸ್ಥಿತಿಯನ್ನು ನಾನು ಯೋಚಿಸಬಲ್ಲೆ. ದೇವರು ನಮಗೆ ಮೋಸ ಮಾಡಿದ. ನಮ್ಮ ಕುಟುಂಬದಲ್ಲಿನ ನಗು ಕಂಡು ಅವನಿಗೆ ಹೊಟ್ಟೆಕಿಚ್ಚಾಗಿದೆ. ಈಗ ಅವನಿಗೆ ತುಸು ನೆಮ್ಮದಿ ಸಿಕ್ಕಿರಬಹುದು! ಕಷ್ಟಗಳು ನಮಗೆ ಹೊಸವೇನಲ್ಲ. ಆದರೆ ಆಗ ಧೈರ್ಯವಿತ್ತು. ನಮ್ಮಲ್ಲಿ ಛಲವಿತ್ತು. ಏನನ್ನೇ ಆಗಲಿ ಎದುರಿಸುವ ಉತ್ಸಾಹ ಇತ್ತು. ಎಲ್ಲಕ್ಕೂ ಮುಖ್ಯವಾಗಿ ಅಪ್ಪ ಇದ್ದರು.

ನಮ್ಮ ಪಾಲಿಗೆ ನೀನೀಗ ಅಮ್ಮ ಮಾತ್ರವಲ್ಲ… ಅಪ್ಪನೂ ಆಗಬೇಕು. ಆಗದ ಹೊರತು ಬೇರೆ ದಾರಿಗಳಿಲ್ಲ. ಇಷ್ಟು ವರ್ಷ ನಿನ್ನ ಮಕ್ಕಳಿಗೆ ನೆರಳು ನೀಡಿದ ನೀನು, ಇನ್ನು ಮುಂದೆಯೂ ನಮ್ಮ ಕೈಬಿಡುವುದಿಲ್ಲ ಎಂಬ ವಿಶ್ವಾಸ ನನ್ನದು. ಅಪ್ಪನನ್ನು ನಾವು ವಿಧಿಯ ಆಟದಲ್ಲಿ ಕಳೆದುಕೊಂಡಿದ್ದೇವೆ. ಸೋತಿದ್ದೇವೆ. ಆದರೆ ನಾವು ಕಲ್ಲಾಗೋಣ. ನಮ್ಮ ಸೌಭಾಗ್ಯ ಕಸಿದ, ಅವನಿಗೆ ನಾವ್ಯಾಕೆ ಹೆದರಬೇಕು?

ಅಮ್ಮ ನೀನು ಧೈರ್ಯ ತೆಗೆದುಕೊಳ್ಳಬೇಕು. ಕಾಲಕಾಲಕ್ಕೆ ಸರಿಯಾಗಿ ಊಟ ಮಾಡು. ನೀನು ನಮಗಾಗಿ ವಿಶೇಷವಾಗಿ ಈ ದಡ್ಡನಿಗಾಗಿ ಎಲ್ಲವನ್ನೂ ಎದುರಿಸಲೇಬೇಕು. ನಾನಿಂದು ಅನಾಥನಾಗಿದ್ದೇನೆ. ಆದರೆ ನೀನಿರುವೆ ಎಂಬ ಧೈರ್ಯ ತುಸು ಸಮಾಧಾನ ತಂದಿದೆ. ಅಣ್ಣನಿಗೆ ಧೈರ್ಯ ಹೇಳು. ಊರಲ್ಲಿ ಬೇಸರವಾದರೆ, ಬೆಂಗಳೂರಿಗೆ ಬಾ…

ಅಮ್ಮ ನಿನ್ನ ದುಃಖ ಮತ್ತು ನೋವನ್ನು ನಾನು ಊಹಿಸಿಯೇ ಗಾಬರಿಕೊಂಡಿದ್ದೇನೆ. ಅದನ್ನೆಲ್ಲ ಅನುಭವಿಸುತ್ತ, ನಮಗೆಲ್ಲ ಧೈರ್ಯ ಹೇಳುವವಳಂತೆ ನೀನು ನಟಿಸುತ್ತಿರುವುದನ್ನು ನಾ ಬಲ್ಲೆ. ನಿನ್ನ ಮನದಾಳದಲ್ಲೀಗ ಅಗ್ನಿಪರ್ವತವಿದೆ. ಆದರೆ ಮನುಷ್ಯರ ಕೈಯಲ್ಲಿ ಏನಿದೆ? ಅಪ್ಪನ ಉಳಿವಿಗಾಗಿ ಎಲ್ಲರೂ ಕೈ ಚಾಚಿದರು… ಆದರೆ ಅವನು ಕೈಕೊಟ್ಟ. ಸಮಾಧಾನ ಮಾಡಿಕೋ…

ಅಪ್ಪ ಬದುಕಿರುವ ತನಕ, ನೀನು ಅವರಿಗಾಗಿಯೇ ಬದುಕಿದೆ. ಈಗ ನಮಗಾಗಿ ಬದುಕು. ಅಪ್ಪನಿಗೆ ಹೆಂಡತಿಯಾಗಿ, ಗೆಳತಿಯಾಗಿ, ಮಾಡಿದ ತಪ್ಪುಗಳ ಕ್ಷಮಿಸುವ ಮತ್ತು ಸರಿಪಡಿಸುವ ತಾಯಿಯಾಗಿ ಜೊತೆಯಲ್ಲಿದ್ದೆ. ನಿನ್ನ ಬಗೆಗೆ ಅಪ್ಪನಿಗೆ ಸಾಕಷ್ಟು ಒಲವಿತ್ತು. ಹೀಗಾಗಿಯೇ ಅಮ್ಮನ ಮನಸ್ಸನ್ನು ನೋಯಿಸಬೇಡಿ ಎಂದು ನಮಗೆಲ್ಲ ಹೇಳುತ್ತಿದ್ದರು. ಅಪ್ಪನಿಗೆ ಸುಖ ನೀಡಲು/ ಅವರ ಕಷ್ಟಗಳ ಹಗುರಗೊಳಿಸಲು ನೀನು ಶಕ್ತಿಮೀರಿ ಪ್ರಯತ್ನಿಸಿರುವುದನ್ನು ನಾವು ಕಂಡಿದ್ದೇವೆ.

ಅವರಿಗದು ಸಾಯುವ ವಯಸ್ಸಲ್ಲ. ಆದರೆ ನಮ್ಮ ದುರದೃಷ್ಟದಿಂದ ನಡು ನೀರಲ್ಲಿ ನಮ್ಮನ್ನು ನಿಲ್ಲಿಸಿ, ತಮ್ಮ ಪಾಡಿಗೆ ತಾವು ಹೊರಟು ಹೋದರು. ಅವರಿಗೆ ಹೋಗುವ ಮನಸ್ಸಾದರೂ ಎಲ್ಲಿತ್ತು. ಅವನೇ ಗುಬ್ಬಚ್ಚಿಯನ್ನು ಹಾವು ಎತ್ತಿಕೊಂಡು ಹೋದಂತೆ, ಅಪ್ಪನನ್ನು ಎತ್ತಿಕೊಂಡು ಹೋದ. ಅಪ್ಪ ಇರುವವರೆಗೂ ಸುಖವಾಗಿದ್ದರು. ಜನರ ಪ್ರೀತಿಗೆ ಪಾತ್ರರಾಗಿದ್ದರು. ಒಬ್ಬ ಮನುಷ್ಯನಿಗೆ ಇಷ್ಟು ಸಾಕಲ್ಲವೇನಮ್ಮ… ?

ಅಪ್ಪ ಇಂದು ನಮ್ಮಿಂದ ದೈಹಿಕವಾಗಿ ದೂರವಾಗಿದ್ದಾರೆ. ಅವರು ನಮ್ಮ ಜೊತೆಯಲ್ಲಿಲ್ಲ. ಮನಸ್ಸಿನಲ್ಲಿದ್ದಾರೆ. ಮುಂದೆಯೂ ಇರುತ್ತಾರೆ. ಅವರ ಕನಸುಗಳಿಗೆ ನಾವು ಜೀವ ತುಂಬೋಣ. ಅವರ ಹಾದಿಯಲ್ಲಿಯೇ ಸಾಗೋಣ.

ಅಮ್ಮ ನಿನಗಾಗಿ ಮಿಡಿಯುವ ಜೀವಗಳು ಸಾಕಷ್ಟಿವೆ ಎನ್ನುವುದನ್ನು ನೀನು ಮರೆಯಬೇಡ. ನೀನು ಚೆನ್ನಾಗಿದ್ದರಷ್ಟೇ ನಾವಿಲ್ಲಿ ಉಸಿರಾಡಲು ಸಾಧ್ಯ. ಕಷ್ಟಗಳ ಮೂಟೆ ನಿನ್ನ ಮೇಲೆ ಬಿದ್ದಿದೆ. ಆದರೆ ನೀನು ಒಂಟಿಯಲ್ಲ. ನಿನ್ನೊಂದಿಗೆ ನಾವು ಮೂರು ಜನ ಮಕ್ಕಳಿದ್ದೇವೆ.

ಬದುಕು ಅಂದರೆ ಅಷ್ಟೇ ಅನಿಸುತ್ತದೆ. ಬಂದದ್ದನ್ನೆಲ್ಲ ಎದುರಿಸಲೇಬೇಕು. ಒಂದು ಪಡೆಯಲು ಇನ್ನೊಂದನ್ನು ಕಳೆದುಕೊಳ್ಳಬೇಕು. ಆದರೆ ನಮ್ಮ ಬದುಕಿನಲ್ಲಿ ಪಡೆದುದಕ್ಕಿಂತಲೂ ಕಳೆದುಕೊಂಡದ್ದೇ ಹೆಚ್ಚು. ಆದರೆ ಏನು ಮಾಡಲು ಸಾಧ್ಯ? ಯೋಗಿ ಪಡೆದದ್ದು ಯೋಗಿಗೆ. ಜೋಗಿ ಪಡೆದದ್ದು ಜೋಗಿಗೆ. ಬಂದದ್ದೆಲ್ಲ ಬರಲಿ ಎದುರಿಸೋಣ.

ಅಮ್ಮ, ದೇವರು ನಿನಗೆ(ನಮಗೆ) ಮೋಸ ಮಾಡಿದ್ದಾನೆ. ಆದರೂ ನೀನು ಅವನನ್ನು ನಂಬು. ಕಾರಣ; ಅವನು ದೇವರು! ಆತ ನಿನ್ನ ಗಂಡ-ಮಕ್ಕಳಿಗೆ ಹಿತ ಕೊಡಲಿ ಎಂದು ಈವರೆಗೆ ಪೂಜಿಸುತ್ತಿದ್ದೆ. ಇನ್ನು ಮುಂದೆ ಬೇಡಿಕೆ ಸಲ್ಲಿಸದೆ ಪೂಜಿಸು. ಆವಾಗಲಾದರೂ ಆ ದೇವರಿಗೆ ನಾಚಿಕೆಯಾಗಲಿ.

ಅಮ್ಮ ಪ್ರಪಂಚ ವಿಚಿತ್ರವಾದುದು. ಉಸಿರಿಡುವ ತನಕ ಒದ್ದಾಟ ತಪ್ಪದು. ಲಾಭವೋ, ನಷ್ಟವೋ… ಈ ಸಮುದ್ರ ಈಜಲೇಬೇಕು. ಈಜಿದವನಿಗೆ ಮುಕ್ತಿ. ಮುಕ್ತಿ ಮಾತು ಪಕ್ಕಕ್ಕಿರಲಿ, ನಮಗಾಗಿ ನೀನು ಈಜಬೇಕಮ್ಮ. ಯಾಕೆಂದರೆ, ನಿನ್ನ ಮಡಿಲಲ್ಲಿ ನಾವಿದ್ದೇವೆ.

ನಿನ್ನ ನೋವು ನನಗೆ ಗೊತ್ತು. ಅದನ್ನು ಮರೆಯುವುದು ಆಗದ ಮಾತು. ಆದರೆ ಕಷ್ಟ ಎದುರಿಸಲು ಶರೀರವನ್ನು ಗಟ್ಟಿ ಮಾಡಿಕೊಳ್ಳಮ್ಮ! ನಾಳೆಗಳಿಗಾಗಿ ನಾವು ಇಂದು ಬದುಕಬೇಕು. ಅದಕ್ಕಾಗಿ ನಮಗಾಗಿ ನೀನು ಇಷ್ಟು ಮಾಡಲಾರೆಯಾ?

  • ಅಮ್ಮ ಬೆಳಗ್ಗೆ ಪುಟ್ಟದೊಂದು ವಾಕಿಂಗ್‌ ಮಾಡು. ಅಣ್ಣ/ಅತ್ತಿಗೆ/ಪುಟ್ಟಿ ಯಾರನ್ನಾದರೂ ಜೊತೆಗೆ ಕರೆದುಕೊಂಡು ನಾಳೆಯಿಂದಲೇ ಪ್ರಾರಂಭಿಸು. ವಾಕಿಂಗ್‌ನ ಮಹಿಮೆ ಕೆಲವೇ ದಿನಗಳಲ್ಲಿ ನಿನಗೆ ಗೊತ್ತಾಗಲಿದೆ!
  • ಸಂಜೆ ಯಾವುದಾದರೂ ದೇವಸ್ಥಾನಕ್ಕೆ ಹೋಗು -ಬೇಕಿದ್ದರೆ ಅದ್ಯಾವುದೋ ಆಶ್ರಮಕ್ಕೆ ಸೇರಿಕೊ…
  • ಬೀರು ತುಂಬ ಪುಸ್ತಕಗಳಿವೆ. ಹಿಂದೆ ನೀ ಎಷ್ಟೊಂದು ಓದುತ್ತಿದ್ದೆ. ಈಗ ಮತ್ತೊಮ್ಮೆ ಓದುವ ಅಭ್ಯಾಸ ಬೆಳೆಸಿಕೊ… ಪುಸ್ತಕ ಓದೋದರಿಂದ ಮನಸಿನ ನೋವು ಕಡಿಮೆಯಾಗುತ್ತದೆ. ಒಂದಿಷ್ಟು ಆತ್ಮವಿಶ್ವಾಸ ಬರುತ್ತದೆ. ಎಲ್ಲಕ್ಕೂ ಮಿಗಿಲಾಗಿ ಸಮಯ ಕಳೆಯುತ್ತದೆ.
  • ಅಮ್ಮ ನಿನಗೆ ಮೊದಲೇ ಗ್ಯಾಸ್ಟ್ರಿಕ್‌. ದಯಮಾಡಿ ಹೊಟ್ಟೆಗೆ ಹಿಂದಿನಂತೆಯೇ ಮೋಸ ಮಾಡಬೇಡ. ಸಾಧ್ಯವಾದಷ್ಟು ತಿನ್ನು. ತಿನ್ನುವುದು ಕಷ್ಟವಾದರೆ ನಮ್ಮ ಮುಖ ನೋಡಿಯಾದರೂ ಕಷ್ಟಪಟ್ಟು ನುಂಗು! ಅಮ್ಮ ಅರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡ.
  • ನನ್ನ ಈ ಪತ್ರ ಓದಿ ನಿನಗೆ ನಗು ಬರಬಹುದು. ನನಗೆ ಸಮಾಧಾನ ಹೇಳುವಷ್ಟು ದೊಡ್ಡವನಾದನೇ ಎಂದು ಸಿಟ್ಟು ಕೂಡಾ ಬರಬಹುದು. ಆದರೆ ನನ್ನಮ್ಮನಿಗೆ ನಾನು ಇಷ್ಟು ಹೇಳಲೇಬೇಕು ಎಂದೆನಿಸಿ ಈ ಪ್ರಯತ್ನ ಮಾಡಿದ್ದೇನೆ. ಈ ಪತ್ರ ಓದಿದ ಮೇಲೆ ನಿನಗೇನನಿಸಿತು?

    ಅಮ್ಮ, ನೀನೂ ಬರೆಯುವುದನ್ನು ಆರಂಭಿಸು. ಸೊಗಸಾಗಿ ಬರೆಯುವ ಶಕ್ತಿ ನಿನ್ನಲ್ಲಿದೆ… ಪ್ರಯತ್ನಿಸು… ಕನಿಷ್ಟ, ನಿನ್ನ ಮಗನಿಗಾಗಿ ಬರೆಯಲಾದರೂ ಪ್ರಯತ್ನಿಸು.

    ಈ ಪತ್ರದಲ್ಲಿ ತಪ್ಪಿದ್ದರೆ ಕ್ಷಮಿಸು ಎಂದು ನಾನು ಕೇಳುವುದಿಲ್ಲ! ಯಾಕೆಂದರೆ; ಇದು ನನ್ನ ಮೊದಲ ತಪ್ಪಲ್ಲ.

    ನಮಸ್ಕಾರ.

    -ನಿನ್ನ ಕುಮಾರಕಂಠೀರವ!

    ಸಂತೆಯೊಳಗೊಂದು ಮನೆಯ ಮಾಡಿ..

    ಸಾಮಾನ್ಯ

    (ಸಂತೆ: ಭಾಗ-೨)

    ಸಿರಾ ಎನ್ನೋ ಬರದೂರು ಉದ್ದುದ್ದ ಅಡ್ಡದ್ದ ಬೆಳೆದರೂ, ಸಂತೆಯ ಗತ್ತು-ಗಮ್ಮತ್ತು ಒಂದು ಚೂರು ಕಡಿಮೆಯಾಗಿಲ್ಲ. ಮಂಗಳವಾರ ಬಂದರೆ ರಾಷ್ಟ್ರೀಯ ಹೆದ್ಧಾರಿಯ ಆಜೂಬಾಜು, ಬಸ್ಟಾಂಡು, ಹೈಸ್ಕೂಲ್ ಫಿಲ್ಡು , ಎಪಿಎಂಸಿ ಆವರಣ -ಹೀಗೆ ಎಲ್ಲೆಲ್ಲೂ  ಜನವೋ ಜನ. ರಂಗಜ್ಜಿ ಮಿಲ್ಟ್ರಿ ಹೋಟೆಲ್‌ಗೆ ಅಂದು ಭರ್ಜರಿ ವ್ಯಾಪಾರ. ಸಂತೆ ನಂಬಿಯೇ ಬದುಕೋ ಅನೇಕ ಸಂಸಾರಗಳು ಸಿರಾದಲ್ಲಿವೆ.

    ಮಾರುಕಟ್ಟೆ ಪಕ್ಕದಲ್ಲೇ ಇದ್ದರೂ, ಸೊಪ್ಪು-ತರಕಾರಿ ಮನೆಮುಂದಕ್ಕೆ ಪ್ರತಿದಿನಾ ಬಂದರೂ, ಸಿರಾ ಹೆಂಗಸರು ಕನಕಾಂಬರ, ಗಿಣಿ ಹಸಿರು, ಅಕಾಶ ನೀಲಿ ಮತ್ತಿತರ ಬಣ್ಣಗಳ ವೈರ್ ಬ್ಯಾಗ್ ಹಿಡಿದು ಸಂತೆಗೆ ಹೊರಡುತ್ತಾರೆ. ಒಂದು ನೂರು ರೂಪಾಯಿ ನೋಟನ್ನು ಗಂಡಂದಿರು ಗೊಣಗುತ್ತಲೇ ಕೊಡುತ್ತಾರೆ. ಅದರಲ್ಲಿ ಹತ್ತಿಪ್ಪತ್ತು ಉಳಿಯುತ್ತೆ ಅನ್ನೋ ಕಾರಣಕ್ಕೋ ಅಥವಾ ಸಂತೆ ನೆಪದಲ್ಲಾದರೂ ತಮ್ಮ ಅಕ್ಕಪಕ್ಕದವರ ಜತೆ ಸುತ್ತಾಡಬಹುದು ಎಂಬ ಒಳ ಆಸೆಯೋ, ಹೆಂಗಸರಿಗಂತೂ ಸಂತೆ ಯಾವತ್ತೂ ಬೇಸರ ತರಿಸಿಲ್ಲ.

    ಜವಗಾನಹಳ್ಳಿಯಿಂದ ಲಾರಿ, ಬಸ್ಸುನಲ್ಲಿ ಹಗ್ಗ ಹಾಕಿಕೊಂಡು ಬೆಳಬೆಳಗ್ಗೆ ಬರೋ ಕೆಲವರು, ನಾರಾಯಾಣ ಸ್ವಾಮಿ ಆಫೀಸು, ಎಸ್‌ಎಸ್ ಮೆಡಿಕಲ್ಸ್, ಹನುಮಾನ್ ಮೆಡಿಕಲ್ಸ್ ಮುಂದೆಲ್ಲ ಉದ್ದಕೆ ಹಗ್ಗ ಹರಡಿಕೊಂಡು ಕೂತು ಬಿಡುತ್ತಾರೆ. ಅವರಿಗೂ ಚಾಪೆ ಮಾರೋರಿಗೂ ಸದಾ ಜಗಳ.

    ಹಗ್ಗದ ಪೆಂಡಿಗಳನ್ನು ಹಾಕಿ, ಪಕ್ಕದ ಜಯಣ್ಣನ ಹೋಟೆಲ್‌ಗೆ ನುಗ್ಗಿ  ಚಿತ್ರಾನ್ನವೋ, ಇಡ್ಲಿನೋ ತರಾತುರಿಯಲ್ಲಿ ತಿಂದು, ಪ್ಲಾಸ್ಟಿಕ್ ಲೋಟದಲ್ಲಿನ ಅರ್ಧ ಚಹಾವನ್ನು ಕೈಯಲ್ಲಿಡಿದೇ ಹಗ್ಗದ ಪೆಂಡಿಗೊಂದು ನಮಸ್ಕಾರ ಹಾಕುತ್ತಾರೆ. ಆಮೇಲೆ ಒಂದೊಂದೇ ಗಂಟು ಬಿಚ್ಚಿ, ವ್ಯವಸ್ಥಿತವಾಗಿ ಜೋಡಿಸಿ ಗಿರಾಕಿಗಳ ಕಾಯುತ್ತಾ ನಿಂತು ಬಿಡುತ್ತಾರೆ. ಪಾನ್ ಪರಾಕ್ ತಿನ್ನೋರು ಪಾಕೇಟ್ ಹೊಡೆಯುತ್ತಾರೆ. ಕೆಲವರು ಬಿಸಿಲ ಧಗೆಗೆ ಸಡ್ಡು ಹೊಡೆಯುವಂತೆ ಬೀಡಿ ಹಚ್ಚುತ್ತಾರೆ. ಕೆಲವರು ಎಲೆ ಅಡಿಕೆ ಜಗಿಯುತ್ತಾ ಬಾಯಿ ಕೆಂಪಗೆ ಮಾಡಿಕೊಳ್ಳುತ್ತಾರೆ.

    ಯಾರಾದರೂ ಹಗ್ಗ ನೋಡಿದರೆ ಸಾಕು, ‘ಬನ್ರೀ ಸ್ವಾಮಿ, ಎಷ್ಟು ಬೇಕು, ಯಾವುದು ಬೇಕು? ಇದು ಜವಗಾನಹಳ್ಳಿ ಹಗ್ಗ ’ ಅನ್ನುತ್ತಾರೆ. ಗಿರಾಕಿಗಳು ಹಗ್ಗವನ್ನು ಕೈಯಲ್ಲಿಡಿದು, ಅಳೆದೂತೂಗಿ ಮಾಡಿ ‘ಎಷ್ಟಕ್ಕೆ ಕೊಡ್ತಿಯಾ?’ ಎಂದು ಮುಖ ನೋಡುತ್ತಾರೆ. ಬೆಳಗ್ಗೆ ವ್ಯಾಪಾರ ಯಾರಿಗೂ ಮೋಸ ಬೇಡ, ಇಷ್ಟು ಕೊಡಿ ಎಂದು ಕೇಳುತ್ತಾರೆ. ಗಿರಾಕಿ ಹೆದರಿದಂತೆ ಮುಖ ಮಾಡಿ, ‘ಹೋಗಯ್ಯಾ ಹೋಗು.. ದುಡ್ಡೇನು ಗಿಡದಲ್ಲಿ ಬೆಳಿಯುತ್ತಾ?‘ ಎನ್ನುತ್ತಾ ಮುಂದೆ ಹೋಗುತ್ತಾನೆ. ಕರೆದರೂ ತಿರುಗಿ ಸಹಾ ನೋಡುವುದಿಲ್ಲ. ಮುಂದೆ ಹೋಗಿ ವಿಚಾರಿಸಿದರೆ, ಎಲ್ಲರದೂ ಒಂದೇ ರೇಟು. ಹಗ್ಗದವರು ಮೊದಲೇ ಮಾತಾಡಿಕೊಂಡಿರುವ ಕಾರಣ, ಯಾರೂ ಕಡಿಮೆ ಬೆಲೆಗೆ ಕೊಡಲು ಒಪ್ಪುವುದಿಲ್ಲ. ಕೊನೆಗೆ ಮುಖ ಊದಿಸಿಕೊಂಡೆ  ಕಾಸುಕೊಟ್ಟು ಹಗ್ಗ ಕೈಯಲ್ಲಿಡಿದು ಗಿರಾಕಿಗಳು ಹೋಗುತ್ತಾರೆ.

    ಮಧ್ಯಾಹ್ನ ಕಾಣಿಸಿಕೊಳ್ಳುವ ಹೆಸರುಬೇಳೆಯವನು ಅವರಿಗೆಲ್ಲ ಹೆಸರುಬೇಳೆ ಕೊಟ್ಟು, ತಲಾ ಒಂದು ರೂಪಾಯಿ ಇಸಕೊಂಡು ಮುಂದೆ ಹೋಗುತ್ತಾನೆ. ಆಮೇಲೆ ‘ಪೆಪ್ಸಿ ಐಸ್ ಬಾಯಾರ್‍ಕೆಗೆ ಒಳ್ಳೇದು..’ ಎಂದು ಕೂಗುತ್ತಾ ಬರುವ ಹುಡುಗ, ತನ್ನ ಮಾಲನ್ನು ಮಾರಲು ಮುಖಮುಖ ನೋಡುತ್ತಾನೆ.   

    ಇಲ್ಲಿ ಮನೆಗಳಲ್ಲಿ ಗಂಡಂದಿರನ್ನು ಆಫೀಸ್‌ಗೆ ಕಳಿಸಿ, ಹೆಂಗಸರು ಸಂತೆಗೆ ರೆಡಿಯಾಗುತ್ತಾರೆ. ‘ರೆಡಿನಾ ಸಂತೆಗೆ?’ ಎಂದು ಒಬ್ಬರನ್ನೊಬ್ಬರು ಕೇಳಿಕೊಳ್ಳುತ್ತಾರೆ. ‘ಈ ಸೀರೆ ಉಟ್ಟುಕೊಳ್ಳಲಾ?’ ಎಂಬ ಸಲಹೆ ಬೇರೆ ಕೇಳುತ್ತಾರೆ. ‘ಯಾವಾಗ್ ತಗೊಂಡಿದ್ದು?’ ಅಂದ್ರೆ, ಅದಕ್ಕೆ ಮಸಾಲೆ ಸೇರಿಸಿ ಸಂಭ್ರಮಿಸುತ್ತಾರೆ. ಯಾವುದೋ ಮದುವೆಗೋ, ನಾಮಕರಣಕ್ಕೋ ಹೋದಂತೆ ಸಿಂಗಾರಬಂಗಾರ ಮಾಡಿಕೊಂಡು ವೈರ್‌ಬ್ಯಾಗ್ ಹಿಡಿದುಕೊಂಡು, ಪರ್ಸಲ್ಲಿ ಕಾಸು ಇದೆಯಾ, ಚಿಲ್ಲರೆ ಇದೆಯಾ ಅನ್ನೋದನ್ನು ಚೆಕ್ ಮಾಡಿಕೊಂಡು ಸಂತೆ ದಿಕ್ಕಿನತ್ತ ಹೆಂಗಸರು ಹೊರಡುತ್ತಾರೆ. ಮನೆಯಲ್ಲಿರೋ ಪುಟ್ಟ ಮಕ್ಕಳು ಅಮ್ಮನ ಕೈಹಿಡಿದುಕೊಂಡು ಹೊರಟು ಬಿಟ್ಟುತ್ತವೆ.

    ಹಳ್ಳಿಗಳಿಂದ ಬರೋ ಜನರು ಸಿನಿಮಾ ಪ್ಲಾನ್ ಹಾಕಿಕೊಂಡಿರುತ್ತಾರೆ. ರಂಗನಾಥ ಟಾಕೀಸ್‌ನಲ್ಲಿ ಯಾವ ಸಿನಿಮಾ? ಸಪ್ತಗಿರಿ ಟಾಕೀಸಲ್ಲಿ ಯಾವ ಸಿನಿಮಾ ಎನ್ನುವುದನ್ನು ಮೊದಲೇ ತಿಳಿದಿರುತ್ತಾರೆ. ಕೆಲವರು ಮಾರ್ನಿಂಗ್ ಶೋಗೆ ನುಗ್ಗಿದರೆ, ಕೆಲವರು ಮ್ಯಾಟನಿಗೆ ನುಗ್ಗುತ್ತಾರೆ. ಕೆಲವರು ಈ ಟಾಕೀಸ್‌ಗಳನ್ನು ಅವುಗಳ ಪಾಡಿಗೆ ಬಿಟ್ಟು ದೇವರ ಚಿತ್ರ(?)ಗಳನ್ನು ಹುಡುಕುತ್ತಾರೆ. ಕದ್ದುಮುಚ್ಚಿ , ಟವಲ್‌ನಿಂದ ಮುಖ ಮರೆಮಾಡಿಕೊಂಡು ಚಿತ್ರಮಂದಿರ ಹೊಕ್ಕವರು ನಿಧಾನವಾಗಿ ಬೀಡಿ ಹೊಗೆ ಬಿಡುತ್ತಾರೆ. ಕಾಲೇಜಿಗೆ ಚಕ್ಕರೆ ಹೊಡೆದು ಸಿನಿಮಾಗೆ ಬಂದಿರೋ ಪಡ್ಡೆಗಳು, ನಮಗೆ ಗೊತ್ತಿರೋರು ಯಾರಾದ್ರೂ ಅಲ್ಲಿದರಾ ಎಂದು ಕಣ್ಣಾಡಿಸುತ್ತಾರೆ.

    ಸಿನಿಮಾ ಶುರುವಾಗಿ ೧೦-೧೫ ನಿಮಿಷವಾದರೂ ಸಂಭಾಷಣೆಗಳೇ ಮುಂದುವರಿದರೆ, ದೇವತೆಗಳು ಕಾಣಿಸದಿದ್ದರೆ ‘ಅವುನಜ್ಜಿ .. ಸೀನ್ ಹಾಕಯ್ಯೋ .. ’ಎಂದು ಜೋರಾಗಿ ಗಂಟಲು ದೊಡ್ಡದು ಮಾಡಿಕೊಂಡು ಕೂಗುತ್ತಾರೆ. ವಿಷಲ್ ಹಾಕುತ್ತಾರೆ. ಅಷ್ಟು ಹೊತ್ತಿಗೆ ಟಾಕೀಸ್ ಮೇಲಿನ ಶೀಟ್‌ಗಳು ಕಾದು ಬೊಬ್ಬೆ ಹೊಡೆಯುವಂತಾಗುತ್ತದೆ. ಫ್ಯಾನ್‌ಗಳು ಸದ್ದು ಮಾಡುತ್ತವೆಯೇ ಹೊರತು, ಜೋರಾಗಿ ತಿರುಗುವುದಿಲ್ಲ. ಒಂದರ್ಥದಲ್ಲಿ ಬಿಸಿ ಬಾಣಲೆಯಲ್ಲಿ ಕುಳಿತೇ ನಮ್ಮೂರ ಶೃಂಗಾರ ಪ್ರಿಯರು ಚಿತ್ರ ವೀಕ್ಷಿಸುತ್ತಾರೆ. ‘ಥತ್ ಬಡ್ಡೀಮಗ ಮೋಸ ಮಾಡಿದ.. ’ ಎಂದು ಗೊಣಗಿಗೊಳ್ಳುತ್ತಲೆ ಚಿತ್ರ ಇನ್ನೂ ಇರುವಾಗಲೇ ಹೊರಬಂದು ಜನರ ಮಧ್ಯೆ ಬೆರೆತುಹೋಗುತ್ತಾರೆ. 

    ಸಂತೆಯಲ್ಲಿ ಅಂಗಡಿ ಹಾಕೋದು ಕೆಲವರಿಗೆ ಕುಲಕಸುಬು. ಮೂಗುದಾರ, ಹಸು-ಕರು ಕುತ್ತಿಗೆಗೆ ಗಂಟೆ, ಕಾಲಿಗೆ ಗೆಜ್ಜೆ ಮತ್ತಿತರ ಅಂಗಡಿಯನ್ನು ಇಡುವ ಕೋಟೆ ನಿವಾಸಿಗೆ ವ್ಯಾಪಾರಕ್ಕಿಂತಲೂ ಕುಲಕಸುಬು ಮುಂದುವರಿಸಿದ್ದೇ ತೃಪ್ತಿ. ಸರಕಾರಿ ಕೆಲಸ ಮಾಡೋ ಒಬ್ಬಾತ ಸಂತೆಯಲ್ಲಿ ವ್ಯಾಪಾರ ಸಹಾ ಮಾಡುತ್ತಾನೆ. ಹೀಗಾಗಿ ಅವುನು ಪ್ರತಿ ಮಂಗಳವಾರ ಮಧ್ಯಾಹ್ನ ಅದೇನ್ ರಜೆ ಹಾಕ್ತಾನೋ, ಕೆಲಸಕ್ಕೆ ಚಕ್ಕರ್ ಹಾಕ್ತಾನೋ  ಸಂತೆಯಲ್ಲಂತೂ ಕೂತು ವ್ಯಾಪಾರ ಮಾಡ್ತಾನೆ.

    ಹಳ್ಳಿಗಳಿಂದ ಬರೋ ಗಂಡಸರು ಮೆಡಿಕಲ್ ಸ್ಟೋರ್‌ಗೆ ತೆರಳಿ ‘ಪೀಪಿ ಕೊಡಿ’ ಎಂದು ಮೆತ್ತಗೆ ಕೇಳುತ್ತಾರೆ. ಕೆಲವು ಆಧುನಿಕ ಮಹಿಳೆ ಥರಾ ಕಾಣೋ ಹಳ್ಳಿ ಹೆಂಗಸರು ನಾಚಿಕೊಂಡು ಬ್ರೆಡ್ ಕೊಡಿ ಎಂದು ಪಿಸಗುಟ್ಟುತ್ತಾರೆ. ಅವರ ಸ್ಥಿತಿ ನೋಡಿಯೇ ಮೆಡಿಕಲ್ ಸ್ಟೋರ್‌ನವರು ಅವರವರು ಬಯಸಿದ್ದನ್ನು ಕೊಟ್ಟು ಮನಸ್ಸಿನಲ್ಲಿಯೇ ನಗುತ್ತಾರೆ.

    ಅಂದ ಹಾಗೆ ಸಂತೆಪೇಟೆಯಲ್ಲಂತೂ ಸಂತೆ ನಂಬಿ ಬದುಕುವ ಹಟ್ಟಿಯೇ ಇದೆ. ಇಲ್ಲಿ ನಡೆಯುತ್ತಿದ್ದ ಸಂತೆ, ಈಗ ಜಾಜಿಕಟ್ಟೆ ಬಳಿಗೆ ಹೋಗಿದೆ. ಅಲ್ಲೂ ಇಕ್ಕಟ್ಟು, ಬೇರೆ ಕಡೆಗೆ ವರ್ಗಾಯಿಸಿ ಎಂದು ಪ್ರಜಾಪ್ರಗತಿ ಮತ್ತು ಸೊಗಡು ಪೇಪರ್‌ನಲ್ಲಿ ಓದುಗರು ಪದೇಪದೇ ಬರೆಯುತ್ತಿರುತ್ತಾರೆ. ಈರುಳ್ಳಿ, ಬೆಳ್ಳುಳ್ಳಿ ಮಾರುವ ಸಂತೆಪೇಟೆಯ ಈಡಿಗರ ಕೇರಿಯ ಹುಡುಗರು ಸಾಕಷ್ಟು ದುಡ್ಡು ಎಣಿಸುತ್ತಾರೆ. ಸಿರಾ ಸಂತೆಯಲ್ಲದೇ ಸುತ್ತಲಿನ ಬರಗೂರು, ಪಟ್ಟನಾಯಕನಹಳ್ಳಿ, ಸೀಬಿ, ಮಧುಗಿರಿ ಸಂತೆಗೂ ಹೋಗುತ್ತಾರೆ. ದಿನಕ್ಕೊಂದು ಸಂತೆಯಲ್ಲಿ ಈ ಹುಡುಗರು ಕಾಣಿಸಿಕೊಳ್ಳುತ್ತಾರೆ. ಸಂತೆ ಹಣದಲ್ಲೇ ಹೆಂಡತಿ ಮಕ್ಕಳನ್ನು ಸುಖವಾಗಿ ಸಾಕುತ್ತಿದ್ದು, ಅಕ್ಕ ತಂಗೀರ ಮದುವೆ ಮಾಡುತ್ತಿದ್ದಾರೆ. ಕೆಲವರು ಬೆಳಗ್ಗೆ ದುಡಿದದ್ದನ್ನು ಸಂಜೆ ಎಣ್ಣೆಗೆ ಖಾಲಿ ಮಾಡ್ತಾರೆ ಎನ್ನೋದನ್ನು ಬಿಟ್ಟರೆ ಎಲ್ಲರೂ ತಕ್ಕಮಟ್ಟಿಗೆ ಕ್ಷೇಮ.

    ಸಂತೆಗೆ ಗುಂಪುಗುಂಪಾಗಿ ಬರೋ ಹೆಂಗಸರಲ್ಲಿ ಕೆಲವರಿಗೆ ಕಳ್ಳತನದ ಚಪಲ. ತರಕಾರಿಯವನು ಮಾತಿನ ಭರದಲ್ಲಿ ಎತ್ತಲೋ ಕಣ್ಣು ಹಾಯಿಸಿದಾಗ ಬ್ಯಾಗಿಗೆ ಒಂದಿಷ್ಟು ತರಕಾರಿ ಒಳಸೇರಿರುತ್ತದೆ. ‘ಅವುನು ಕೊತ್ತಂಬರಿ ಸೊಪ್ಪನ್ನು ರೂಪಾಯಿಗೆ ಕಡಿಮೆ ಕೊಡಲ್ಲ ಅನ್ತಾಯಿದ್ದ, ನಾನು ರೂಪಾಯಿ ಕೊಡದೇ ಎಗರಿಸಿದೆ ’ ಎಂದು ತಮ್ಮ ಚಾಲೂಕುತನವನ್ನು ತಮ್ಮ ಸಂತೆ ಗೆಳತಿಯರ ಜತೆ ಹಂಚಿಕೊಳ್ಳುತ್ತಿರುತ್ತಾರೆ. ಅವರು ಕದ್ದು ಸಿಕ್ಕಿಬಿದ್ದಾಗ ಎಲ್ಲರೂ ತರಕಾರಿಯವರ ಗಲೀಜು ಬೈಗುಳಗಳನ್ನು ಹಂಚಿಕೊಳ್ಳಬೇಕಾಗುತ್ತದೆ. 

    ಸಂತೇದಿನ ಲಕ್ಷ್ಮಿ ಕುಣಿಯೋದು ಕಂಡು ಅಂಗಡಿ ವ್ಯಾಪಾರಿಗಳಿಗೆ ಖುಷಿ. ಅಂದು ಸರತಿ ಸಾಲಂತೆ ೧೦-೧೫ ನಿಮಿಷಕ್ಕೊಬ್ಬರು ಬರೋ ಭಿಕ್ಷುಕರನ್ನು ಕಂಡು, ತಲೆ ಕೆಟ್ಟು ಗೊಬ್ಬರವಾಗುತ್ತೆ. ಆ ಭಿಕ್ಷುಕರೋ ಒಂದು ರೂಪಾಯಿಗಿಂತ ಕಡಿಮೆ ಮುಟ್ಟೋದಿಲ್ಲ. ಯಾವುದೋ ಜನ್ಮದ ಸಾಲ ವಸೂಲಿ ಮಾಡುವಂತೆ ಅಂಗಡಿ ಮುಂದೆ ನಿಂತ ದಾಸಯ್ಯಗಳು ಶಂಖ ಊದುತ್ತಾರೆ. ಕೆಲವರ  ಜಾಗಟೆ ಬಡಿಯುತ್ತಾರೆ. ಹಣ ಇಲ್ಲ ಎಂದರೆ ಹಿಡಿ ಶಾಪ ಹಾಕುತ್ತಾ ಮುಂದಕ್ಕೆ ಹೋಗುತ್ತಾರೆ. ಚಿಲ್ಲರೆ ಇಲ್ಲ ಎಂದು ಸಾಗಾಕಲು ನೋಡಿದರೆ, ‘ತಗೊಳ್ಳಿ ಸ್ವಾಮಿ ಚಿಲ್ಲರೆ..’ ಎಂದು ಪುಡಿಗಾಸುಗಳ ಆ ಭಿಕ್ಷುಕ ಮಹಾಶಯರು ಜೋಡಿಸುತ್ತಾರೆ.

    ಹೊಸದಾಗಿ ಮದುವೆಯಾದವರಿಗೆ ಸುತ್ತಾಡೋದಕ್ಕೆ ಸಂತೆಗಿಂತಲೂ ಒಳ್ಳೆ ಜಾಗ ಯಾವುದಿದೆ? ಹೊಸ ಜೋಡಿಗಳು ಮಾತ್ರವಲ್ಲ, ಹಳೇ ಜೋಡಿಗಳು ಸಹಾ ಸಂತೆ ನೆಪದಲ್ಲಿ ಹೊರಗೆ ಬರುತ್ತವೆ. ಸಂತೆ ತುಂಬ ಸುತ್ತಾಡುತ್ತ, ಬ್ಯಾಗ್‌ನ ಹಿಡಿಗಳನ್ನು ಹಂಚಿಕೊಂಡು, ತಮ್ಮ ಸಮಾನಭಾರಾಭಿರುಚಿ ಸೂತ್ರವನ್ನು ಎಲ್ಲರ ಮುಂದೆ ಪ್ರದರ್ಶಿಸುತ್ತಾರೆ.

    ಆಟೋಗೆ ಕೊಟ್ಟರೆ ಹೋಗುತ್ತಲ್ಲ ಎಂದು ಕೆಲವು ಮಹಿಳೆಯರು ಉಸ್ಸಪ್ಪಾ ಅನ್ನುತ್ತಲೇ ಜಾಜೀಕಟ್ಟೆ ಮೇಲೆ ಬ್ಯಾಗನ್ನು ತಲೆ ಮೇಲೆ ಹೊತ್ತುಕೊಂಡು ಮನೆಯತ್ತ ಹೆಜ್ಜೆ ಹಾಕುತ್ತಾರೆ. ಮನೆ ಸೇರೋ ಹೊತ್ತಿಗೆ ಅವರಿಗೆಲ್ಲ ಬೆವರಲ್ಲೇ ಸ್ನಾನ ಮಾಡಿದಂತಾಗಿರುತ್ತೆ. ಬ್ಯಾಗ್ ಹೊತ್ತುಕೊಂಡು ಬರೋ ಹೆಂಗಸರ ಮುಖ ನೋಡಿದರೆ ಅಯ್ಯೋ ಪಾಪ ಅನ್ನಿಸುತ್ತೆ.
    ಇದನ್ನೂ ಓದಿ:
    ಸಂತೆ: ಭಾಗ-೧

    ಒಂದೇ ಒಂದು ಸಾರಿ, ಕಣ್ಮುಂದೆ ಬಾರೇ..

    ಸಾಮಾನ್ಯ

    ಎಲ್ಲಿರುವೆ ಮನವ ಕಾಡುವ ರೂಪಸಿಯೇ.. ‘ಎಂದು ಅನಂತ್ ನಾಗ್ ಥರಹಾ ಹಾಡುತ್ತಾ ನಾನು ಕಾಡು ಮೇಡು ಅಲೆಯಲು ಸಾಧ್ಯವಿಲ್ಲ. ಆದರೂ ಹುಡುಕುತ್ತಲೇ ಇರುತ್ತೇನೆ. ಇವರಲ್ಲಿ ಯಾರಾದರೂ ನನ್ನವಳು ಇದ್ದಿರಬಹುದಾ ಎಂದು ಊಹಿಸುತ್ತೇನೆ. ನೀ ಯಾರು ನನಗೆ ಗೊತ್ತಿಲ್ಲ.. ನಾ ಯಾರು ನಿನಗೆ ಮೊದಲೇ ಗೊತ್ತಿಲ್ಲ.. ಆದರೆ ನೀ ನನಗೆ ಬೇಕು. ಒಂದು ಸಲ, ಒಂದೇ ಒಂದು ಸಲ ನನ್ನ ಬಳಿಗೆ ನೀ ಬಾ.. ನನ್ನ ಹೃದಯವನ್ನು ಬಿಚ್ಚಿಡುತ್ತೇನೆ… ಅದರೊಳಗೆ ನಿನ್ನನ್ನು ಬಚ್ಚಿಟ್ಟುಕೊಳ್ಳುತ್ತೇನೆ.

    ಏಳು ಸಮುದ್ರ ದಾಟಿದ ರಾಜಕುಮಾರ ನಾನಲ್ಲ. ನಭದಿಂದ ಸೂರ್ಯನ ಕಿತ್ತು ತಂದು ನಿನ್ನ ತುರುಬಿಗೆ ನಾ ಮುಡಿಸಲಾರೆ. ಸೂರ್ಯನ ತಂದು ನಿನ್ನ ಮಗನಿಗೆ ಆಟಿಕೆಯಾಗಿ ನೀಡುತ್ತೇನೆ ಎಂದು ನಾ ಅಪ್ಪಿತಪ್ಪಿಯೂ ಹೇಳಲಾರೆ. ಆದರೂ ನೀ ನನ್ನ ಪ್ರೀತಿಸು, ಮುದ್ದಿಸು. ಜಗತ್ತಿನಲ್ಲಿ ಮನುಷ್ಯ ಹೆಚ್ಚು ಪ್ರೀತಿಸುವುದು ಯಾರನ್ನು ಗೊತ್ತೆ? ಇನ್ಯಾರನ್ನು ಅವನನ್ನು ಅವನೇ ಪ್ರೀತಿಸುತ್ತಾನೆ. ಆಮೇಲೆ ಬಂಧು, ಬಳಗ ಇತ್ಯಾದಿ. ಆದರೆ ನಾನು ನಿನ್ನನ್ನು ಪ್ರೀತಿಸುತ್ತೇನೆ. ನೀನು ನಂಬಬೇಕು. ಪರೀಕ್ಷೆ ಮಾಡಲು ಹೊರಟರೇ, ನನಗೆ ಸಿಟ್ಟು ಬರುತ್ತದೆ. ನನ್ನ ಪ್ರೀತಿಯನ್ನು ಶಂಕಿಸುವ ನಿನ್ನ ಜೊತೆ ನಾನು ಹೇಗೆ ತಾನೇ, ಬೆರೆಯಲಿ.

    ಬಹುಶಃ ನೀನು ಸಹಾ ನನ್ನನ್ನು ಹುಡುಕುತ್ತಿರುವೆ. ಪ್ರಪಂಚ ದೊಡ್ಡದು, ಹೀಗಾಗಿ ಮುಖಮುಖ ನೋಡಲು ಸಾಧ್ಯವಾಗಿಲ್ಲ. ಕಣ್ಣಲ್ಲಿ ಕಣ್ಣಿಟ್ಟು, ಕೈಯಲ್ಲಿ ಕೈಹಿಡಿದು ಆ ಬಿಸಿಯನ್ನು ಸವಿಯಲು ಸಾಧ್ಯವಾಗಿಲ್ಲ. ರಸ್ತೆ ಬದಿಯ ಪಾನೀಪುರಿ ತಿನ್ನುತ್ತಾ, ಪಾರ್ಕಿನ ಮರದಡಿ ನಿಂತು ಮಳೆ ಇನ್ನಷ್ಟು ಸುರಿಯಲಿ ಎಂದು ಪ್ರಾರ್ಥಿಸುವ ಅವಕಾಶ ನಮ್ಮಿಬ್ಬರಿಗೆ ಸಿಕ್ಕಿಲ್ಲ. ಪ್ರಪಂಚ ನಮಗಾಗಿ ಚಿಕ್ಕದಾಗಲಿ.. ಏನಂತೀಯಾ?

    ಅದೇನೇ ಆಗಲಿ, ಬೇಗ ಬಾ. ಹೇಗಾದರೂ ಬಾ. ಓಡಿ ಬಾ. ನನ್ನ ಕೈಗೆ ಕೈ ಸೇರಿಸು. ಜಗತ್ತು ನಾಚುವಷ್ಟು ಪ್ರೀತಿ ಮಾಡೋಣ, ಜಗತ್ತಿಗೆ ಗೋಲಿ ಹೊಡೆಯೋಣ. ನಿನ್ನ ಒಂದೇ ಒಂದು ಕಣ್ಣ ಹನಿ ಭೂಮಿ ಸೇರದಂತೆ ನಾ ನಿನ್ನ ಕಾಯುತ್ತೇನೆ. ಮೊದಲೇ ಹೇಳಿ ಬಿಡುತ್ತೇನೆ. ಇದು ನನ್ನ ದೌರ್ಬಲ್ಯವೂ ಹೌದು, ಪ್ರಾಬಲ್ಯವೂ ಹೌದು. ನಿನ್ನ ಕನಸಿನ ಕಾಲು, ನನ್ನ ಹಾಸಿಗೆಯ ಮೀರಬಾರದು. ಉಸ್ಸಪ್ಪಾ ಎಂದು ನಿಟ್ಟುಸಿರು ಬಿಡಬೇಡ. ದೂರ ನಿಲ್ಲಬೇಡ. ನನ್ನ ಮಾತನ್ನು ತಾಳ್ಮೆಯಿಂದ ಕೇಳಿಸಿ ಕೋ. ವಾರವಿಡೀ ನಾವಿಬ್ಬರೂ ಹಸಿದ ಸಂದರ್ಭದಲ್ಲಿ ಒಂದು ರೊಟ್ಟಿ ಸಿಕ್ಕರೇ, ನಾನು ಅದನ್ನು ನಿನಗೆ ನೀಡುತ್ತೇನೆ. ನಿನ್ನ ತೇಗು ನಾನಾಗುತ್ತೇನೆ. ನಾನು ನೀರು ಕುಡಿದು ಮಲಗುತ್ತೇನೆ. ಇದು ಸುಳ್ಳಲ್ಲ. ಹದಿನಾರಾಣೆ ಸತ್ಯ.

    ಸದ್ಯಕ್ಕಂತೂ ಭಯವಿಲ್ಲ. ಕೈಬಾಯಿಗೆ ಸಾಕಾಗುವಷ್ಟು ಸಂಬಳ ಬರುತ್ತೆ. ನಾಳೆ ಇರುತ್ತಾ? ಗೊತ್ತಿಲ್ಲ. ಸಂಬಳ ಇಲ್ಲದಿದ್ದರೂ, ಕೆಲಸ ಇಲ್ಲದಿದ್ದರೂ ನಾ ಇರುತ್ತೇನೆ. ನನ್ನುಸಿರು ಇರುವ ತನಕ ನಿನ್ನ ಉಸಿರು ನಿಲ್ಲದಂತೆ ನೋಡಿಕೊಳ್ಳುತ್ತೇನೆ. ಉಸಿರಲ್ಲಿ ಉಸಿರಾಗಿ ಬೆರೆತು, ಪ್ರೇಮ ಲೋಕದಲ್ಲಿ ವಿಹರಿಸೋಣ ಬಾರೇ.

    ನಾನು ಬಡವಿ ನೀನು ಬಡವ
    ಒಲವೇ ನಮ್ಮ ಬದುಕು
    ಹಂಚಿಕೊಂಡೆವದನು ನಾವು
    ಅದಕು ಇದಕು ಎದಕು..

    ಯಾವುದೋ ಪಾರ್ಕಲ್ಲಿ, ಸಿನಿಮಾ ಟಾಕೀಸಲ್ಲಿ, ಬಿಗ್ ಬಜಾರ್ ನಲ್ಲಿ ಕೈಕೈ ಹಿಡಿದು ಸುತ್ತಾಡುವ ಪ್ರಣಯದ ಹಕ್ಕಿಗಳ ಕಂಡಾಗ ಮನದಲ್ಲಿ ಚಿಂತೆಯ ಗುಂಡುಕಲ್ಲು. ಒನಕೆಯಿಂದ ಹೃದಯವ ಕುಟ್ಟಿದಷ್ಟು ಯಾತನೆ. ಆದರೆ ಏನು ಮಾಡಲಿ, ನೀನು ಬರುವ ತನಕ ಇದೆಲ್ಲಾ ಇದ್ದದ್ದೇ. ‘ಮದುವೆಯಾಗುವ ತನಕ ಆಗಲಿಲ್ಲವಲ್ಲ ಎಂಬ ಚಿಂತೆ. ಆದ ಮೇಲೆ ನೂರೊಂದು ಚಿಂತೆ’ಎಂದು ಗೆಳೆಯ ಗೊಣಗುತ್ತಿದ್ದ. ಆದರೂ ನಾನು ಇದಕ್ಕೆಲ್ಲ ಹೆದರುವುದಿಲ್ಲ. ನೀನು ನನ್ನೊಂದಿಗೆ ಇದ್ದರೆ, ಭೂಮಂಡಲವನ್ನೇ ಕುಟ್ಟಿ ಪುಡಿ ಮಾಡುವ ಧೈರ್ಯ ಎದೆಯಲ್ಲಿ ಇರುತ್ತೆ.

    ನಿನಗೆ ಮುಖ್ಯ ವಿಷಯ ಹೇಳೋದು ಮರೆತೆ. ನನಗೊಬ್ಬಳು ತಾಯಿಯಿದ್ದಾಳೆ. ಬೇರೆಯವರೂ ಇದ್ದಾರೆ.. ಆದರೆ ನನ್ನ ಲೆಕ್ಕದಲ್ಲಿ ಅವಳೊಬ್ಬಳೇ ಮುಖ್ಯ.. ಮುಖ್ಯ ಮಾತ್ರವಲ್ಲ ನನ್ನ ಜೀವ. ನನ್ನ ಪಾಲಿಗೆ ಅವಳೊಂದು ಕಣ್ಣು, ನೀನೊಂದು ಕಣ್ಣು. ಯಾವ ಕಣ್ಣಿಗೆ ಪೆಟ್ಟಾದರೂ ನನಗೇ ನೋವಾಗುತ್ತದೆ. ಅವಳ ನೋಯಿಸಬೇಡ. ನಿನಗಿದು ಅರ್ಥವಾಗಿದೆ ಅಂದುಕೊಳ್ಳುತ್ತೇನೆ.

    ಮೊನ್ನೆ ಕನ್ನಡಿ ನೋಡುತ್ತಿದ್ದೆ. ನಾನು ನಿಜಕ್ಕೂ ಬೆಚ್ಚಲಿಲ್ಲ. ಬೆಚ್ಚುವ ಕಾಲ ಹೋಗಿ ಐದಾರು ವರ್ಷವಾದವು. ಕೂದಲ ಕಾಡಿನಲ್ಲಿ ಬಿಳಿಯರ ಜನಸಂಖ್ಯೆ ಹೆಚ್ಚುತ್ತಿದೆ. ಕರಿಯರ ಹಿಡಿದು ಅವರ ಬುಡಕ್ಕೆ ಕತ್ತರಿ ಹಾಕುವ ತಂತ್ರ ಈಗ ಫಲಿಸುವುದಿಲ್ಲ. ನಿನಗೂ ಇಂಥ ಕಷ್ಟಗಳಿವೆ ನನಗೆ ಗೊತ್ತು. ಆದರೂ ಯಾಕೆ ತಡ ಮಾಡುತ್ತಿರುವೆ? ನೀನು ಬಂದರೆ ಜೊತೆಯಾಗಿ ದೀಪಾವಳಿ ಆಚರಿಸೋಣ. ದೀಪ ಬೆಳಕಿಸೋಣ. ಬಹುಶಃ ನೀನು ಬಂದರೆ ದೀಪದ ಅವಶ್ಯಕತೆಯೇ ಬೇಕಾಗುವುದಿಲ್ಲ.